ಹಾಸ್ಯ ಸಾಮ್ರಾಟ ನರಸಿಂಹರಾಜು

ನರಸಿಂಹರಾಜುರವರು 24-07-1923ರಲ್ಲಿ ತುಮಕೂರು ಜಿಲ್ಲೆ ತಿಪಟೂರಿನಲ್ಲಿ ಜನಿಸಿದರು. ತಿಪಟೂರು ಪಟ್ಟಣದಲ್ಲಿ ಪೋಲಿಸ್ ಪೇದೆಯಾಗಿದ್ದ ರಾಮರಾಜು ಹಾಗೂ ವೆಂಕಟಲಕ್ಷ್ಮಮ್ಮ ದಂಪತಿಗಳ ಐವರು ಮಕ್ಕಳಲ್ಲಿ (ಮೂರು ಹೆಣ್ಣು ಹಾಗು ಎರಡು ಗಂಡು) ನರಸಿಂಹರಾಜು ಎಲ್ಲರಿಗಿಂತ ಹಿರಿಯರು, ಬಾಲ್ಯದ ದಿನಗಳನ್ನು ತಿಪಟೂರಿನ ಕೋಟೆಯಲ್ಲಿ ಕಳೆದ ನರಸಿಂಹರಾಜು ತಮ್ಮ ನಾಲ್ಕನೆಯ ವಯಸ್ಸಿನಲ್ಲಿ ಸಿ.ಬಿ.ಮಲ್ಲಪ್ಪನವರ ಶ್ರೀಚಂದ್ರಮೌಳೀಶ್ವರ ನಾಟಕ ಸಭಾದಲ್ಲಿ ಬಾಲಕಲಾವಿದನಾಗಿ ಸೇರಿಕಕೊಂಡರು. ಅವರಿಗೆ ಅಲ್ಲಿಯೇ ಬದುಕಿನ ಶಿಕ್ಷಣವೂ ಆರಂಭವಾಯಿತು. ಹಾಸ್ಯಪಾತ್ರಕ್ಕೆ ಹೇಳಿ ಮಾಡಿಸಿದಂತಹ ಮುಖ, ಶರೀರವನ್ನು ಸಹಜವಾಗಿ ಪಡೆದಿದ್ದ ನರಸಿಂಹರಾಜು ಅವರಿಗೆ ಹಾಸ್ಯಪಾತ್ರಗಳ ನಿರ್ವಹಣೆ ಸಹಜವಾಗಿತ್ತು. ರಂಗಮಂಚದ ಮೇಲೆ ಬಂದು ನಿಂತರೆ ಸಾಕು, ಪ್ರೇಕ್ಷಕರು ನಗೆಹೊನಲು ಹರಿಸುತ್ತಿದ್ದರು. ನರಸಿಂಹರಾಜು ಅವರು ಪೌರಾಣಿಕ ಪಾತ್ರಗಳು. ವಿಶ್ವಾಮಿತ್ರ, ರಾಮ ಕೆಲವೊಮ್ಮೆ ರಾವಣ, ಭರತ, ಇನ್ನು ಕೆಲವು ಸಲ ಲಕ್ಷ್ಮಿಯ ಪಾತ್ರವನ್ನು ನಿರ್ವಹಿಸುತ್ತಿದ್ದರು. ಆಗಲೆ ಜನಪ್ರಿಯತೆ ಪಡೆದಿದ್ದ ಬೇಡರ ಕಣ್ಣಪ್ಪ ನಾಟಕದಲ್ಲಿ ಅರ್ಚಕನ ಪುತ್ರ ಕಾಶಿಯ ಪಾತ್ರದಲ್ಲಿ ನರಸಿಂಹರಾಜು ತುಂಬ ಜನಪ್ರಿಯತೆ ಪಡೆದರು.ಶ್ರೀ ಚಂದ್ರಮೌಳೀಶ್ವರ ನಾಟಕ ಸಭಾ, ಎಡತೊರೆಯ ಕಂಪೆನಿ, ಹಿರಿಣ್ಣಯ್ಯನವರ ಮಿತ್ರಮಂಡಲಿ, ಭಾರತ ಲಲಿತಾ ಕಲಾ ಸಂಘ, ಬೇಲೂರಿನ ಗುಂಡಾ ಜೋಯಿಸರ ಕಂಪೆನಿ, ಗುಬ್ಬಿಯ ಚೆನ್ನಬಸವೇಶ್ವರ ನಾಟಕ ಕಂಪೆನಿಯ ನಾಟಕಗಳಲ್ಲಿ ತಮ್ಮ ಬಣ್ನದ ಬದುಕಿನ ಆರಂಭದ ೨೭ ವರ್ಷಗಳನ್ನು ನರಸಿಂಹಾರಾಜು ಕಳೆದಿದ್ದರು. ರಾಜ್ಕುಮಾರ್ ಅವರೊಂದಿಗೆ ಬೇಡರ ಕಣ್ಣಪ್ಪ ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಪಡೆದ ಅವರು ನಂತರವೂ ರಂಗಭೂಮಿಯನ್ನು ಕಡೆಗಳಿಸಲಿಲ್ಲ.ಬಾಲನಟನಾಗಿ ರಂಗ ಪ್ರವೇಶಿಸಿದ ನರಸಿಂಹರಾಜು ಬೆಳೆಯುತ್ತಿದ್ದಂತೆ ದೊಡ್ಡವರ ಪಾತ್ರಗಳಿಗೆ ಬಡ್ತಿ ಪಡೆದರು. ತಮ್ಮ ವಿಶಿಷ್ಟ ಅಭಿನಯದಿಂದ ಹಾಸ್ಯನಟರಾಗಿ ರೂಪುಗೊಂಡರು. ರಂಭೂಮಿಯಲ್ಲಿ ಪಡೆದ ಎಲ್ಲ ಬಗೆಯ ಅನುಭವ ಅವರಿಗೆ ಸಿನಿಮಾ ಜಗತ್ತಿನಲ್ಲಿ ಉಪಯೋಗಕ್ಕೆ ಬಂದಿತು. ಚಿತ್ರರಂಗ ಪ್ರವೇಶಕ್ಕೆ ನಿಮಿತ್ತವಾದ ಬೇಡರ ಕಣ್ಣಪ್ಪದಲ್ಲಿನ ಕಾಶಿಯ ಪಾತ್ರ ಅವರಿಗೆ ಲೀಲಾಜಾಲವಾಗಿತ್ತು. ಬೇಡರ ಕಣ್ಣಪ್ಪ ನಾಟಕದಲ್ಲಿ ಸಾವಿರಕ್ಕೂ ಹೆಚ್ಚಿನ ಪ್ರದರ್ಶನಗಳಲ್ಲಿ ಅವರು ಕಾಶಿಯ ಪಾತ್ರ ವಹಿಸಿದ್ದರು.